welcome to lavalavika


I made this widget at MyFlashFetish.com.

Friday, December 24, 2010

ಡಿ.ವಿ.ಗುಂಡಪ್ಪ


ಡಿ ವಿ ಜಿ(ಮಾರ್ಚ್ ೧೭೧೮೮೭ - ಅಕ್ಟೋಬರ್ ೭೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

ಶಿಕ್ಷಣ

ಡಿ ವಿ ಜಿ ಅವರು ೧೮೮೭ಮಾರ್ಚ್ ೧೭ ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು. ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ. ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು.

ವೃತ್ತಿ ಜೀವನ

ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು.


ಪತ್ರಿಕೋದ್ಯಮ

ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು "ಸೂರ್ಯೋದಯ ಪ್ರಕಾಶಿಕ" ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್ರಿಕೆ ನಡೆಯಲಿಲ್ಲ. ಪುನಃ ಮತ್ತೊಂದಕ್ಕೆ ಗುಂಡಪ್ಪನವರ ಹೆಜ್ಜೆ, ಖರ್ಚಿಗಾಗಿ ಏನಾದರೂ ಬರೆಯಬೇಕಿತ್ತು. ಯಾವುದಾದರೂ ಪತ್ರಿಕೆ ಬೇಕಿತ್ತು. ಹಲವಾರು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆದರು. ಕನ್ನಡ ಪತ್ರಿಕೆಗಳಲ್ಲಿ ಅನುಭವ ಪಡೆದರು. "ವೀರಕೇಸರಿ" ಯಲ್ಲಿ ಕಾರ್ಯ ನಿರ್ವಹಿಸಲು ಮದ್ರಾಸ್ ಗೆ ಹೋದಾಗ ಅಲ್ಲಿ "ಹಿಂದೂ" ಪತ್ರಿಕೆಗೆ ಬರೆದರು. ನಂತರ "ಮೈಸೂರು ಟೈಮ್ಸ್" ಇಂಗ್ಲಿಷ್ ಪತ್ರಿಕೆಯ ಸಹಾಯಕ ಸಂಪಾದಕರಾದರು.

ಸಾಹಿತ್ಯ

ದಿವಾನ್ ರಂಗಾಚಾರ್ಯ ಅವರ ಬಗ್ಗೆ ಇಂಗ್ಲಿಷ್ ನಲ್ಲಿ ಬರೆದ ಲೇಖನ ಡಿ ವಿ ಜಿ ಅವರ ಬದುಕಲ್ಲಿ ಹೊಸ ತಿರುವು ಪಡೆಯಿತು. ಮುಂದೆ ಪುಸ್ತಕ ರೂಪಕ್ಕೆ ತರಲು ಹಲವು ಮಾರ್ಪಾಡು ಮಾಡಿದರು. ಇದು ಪ್ರಕಟವಾಗುತ್ತಿದ್ದಂತೆ ಕೃತಿ ಪ್ರಕಟಣೆ ಮೂಲಕವೂ ಹಣ ಬರುವಂತಾಯಿತು. ಲೇಖನ, ಪರಿಚಯದ ಜೊತೆ ಕಾವ್ಯ ಕೃಷಿ ಪ್ರಧಾನವಾಯಿತು. ಅನುವಾದ ಸಾಹಿತ್ಯದ ಮೂಲಕ ಡಿ ವಿ ಜಿ ಉತ್ತಮ ಹೆಸರು ಪಡೆದರು. ರಾಜಕೀಯ ವಿಶ್ಲೇಷಣೆ, ತತ್ತ್ವಶಾಸ್ತ್ರಧಾರ್ಮಿಕ ವಿಚಾರಗಳು, ಪ್ರಬಂಧ ಬರಹ, ಬೇರೆ ಬೇರೆ ಮಗ್ಗಲುಗಳಾದವು.
ಕನ್ನಡ ಕಾವ್ಯಕ್ಷೇತ್ರದಲ್ಲಿ "ಮಂಕುತಿಮ್ಮನ ಕಗ್ಗ" ಹಾಗೂ "ಮರುಳ ಮುನಿಯನ ಕಗ್ಗ" ದ ಮೂಲಕ ಡಿ ವಿ ಜಿ ಮನೆಯ ಮಾತಾದವರು:
"ಬದುಕು ಜಟಕಾಬಂಡಿ, ವಿಧಿಯದರ ಸಾಹೇಬ |
ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು ||
ಮದುವೆಗೋ ಮಸಣಕೋ ಹೋಗೆಂದ ಕಡೆಗೋಡು |
ಪದ ಕುಸಿಯೆ ನೆಲವಿಹುದು -- ಮಂಕುತಿಮ್ಮ ||"
ಈ ಕೃತಿ ಕನ್ನಡದ ಭಗವದ್ಗೀತೆಯೆಂದೇ ಹಲವರು ಭಾವಿಸುವಂತಹ ಉತ್ಕೃಷ್ಟ ಸಂಕಲನ. "ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು" ಎಂದ ಡಿ ವಿ ಜಿ, ಕವಿ ಪರಂಪರೆ ಹಾಗೂವಿಜ್ಞಾನ ನಂಬಿಕೆಗೆ ಕೊಂಡಿ ಬೆಸೆದವರು. ಹಳೆಯದನ್ನು ಬಿಡಲಾರದ ಹೊಸತು ವಿಜ್ಞಾನ ಸೃಷ್ಟೀಕರಿಸಲಾಗದ ಭಾರತೀಯ ಮನಸ್ಸುಗಳನ್ನು ಒಂದಾಗಿಸುವ ವಿಚಾರಲಹರಿಯನ್ನು ಕಾವ್ಯ ಮುಖೇನ ನೀಡಿದ ಡಿ ವಿ ಜಿ ಪತ್ರಕರ್ತರಾಗಿಯೂ ಹೆಸರಾದವರು. ವ್ಯಕ್ತಿ ವಿಚಾರದ ಬರಹಗಳಿಂದ ನಾಲ್ಕು ಕಾಲ ನೆನಪಲ್ಲಿರುವವರು. ಹೀಗಾಗಿ ಅವರ "ಮಹನೀಯರು", "ಜ್ಞಾಪಕ ಚಿತ್ರಶಾಲೆ" ಮಹತ್ವದ ವಿಚಾರಗಳನ್ನು ಹೊರಚೆಲ್ಲಿದ ಕೃತಿಗಳು.
ಡಿ ವಿ ಜಿ ಅವರನ್ನು ಆಧುನಿಕ ಭಾರತೀಯ ಸಾಹಿತ್ಯದ ಒಂದು ಅಶ್ವತ್ಥ ವೃಕ್ಷ ಎಂದು ಕರೆಯುತ್ತಾರೆ. ಡಿ ವಿ ಜಿ ಅವರ ವಿದ್ವತ್ತು ಹಾಗೂ ಚಿಂತನೆ ಕಂಡವರು ಒಬ್ಬ ಋಷಿ ಎಂದಿದ್ದಾರೆ. ಅವರ ಸಾಹಿತ್ಯ ಬಾಳಿಗೊಂದು ನಂಬಿಕೆಯನ್ನೂ, ಭರವಸೆಯನ್ನೂ ಕೊಟ್ಟಿದೆ. ಹಾ.ಮಾ.ನಾಯಕರು "ಡಿ ವಿ ಜಿ ಅವರದು ಸತ್ಯ ಶಿವ ಸೌಂದರ್ಯಗಳು ಸಮಹಿತವಾದ ಸಾಹಿತ್ಯ" ಎಂದಿದ್ದಾರೆ.
ಕರ್ನಾಟಕ ಸರ್ಕಾರ ಡಿ ವಿ ಜಿ ಅವರ ಶತಮಾನೋತ್ಸವ ಸಂದರ್ಭದಲ್ಲಿ ಅವರ ಸಮಗ್ರ ಸಾಹಿತ್ಯ ಸಂಪುಟ ಹೊರತರುವ ಯೋಜನೆ ಹಮ್ಮಿಕೊಂಡಿದೆ. ಈ ಪ್ರಕಾರ "ಡಿ ವಿ ಜಿ ಕೃತಿ ಶ್ರೇಣಿ"ಯಲ್ಲಿ ವಿಚಾರ, ವಿಮರ್ಶೆ, ನಾಟಕ, ಶಿಶು ಸಾಹಿತ್ಯ, ಜೀವನ ಚರಿತ್ರೆಗಳು, ಕಾವ್ಯ ೧-೨, ನೆನಪಿನ ಚಿತ್ರಗಳು, ಸಂಕೀರ್ಣ ಹೊರತಂದಿದೆ.
ಕನ್ನಡದ ವಿಜ್ಞಾನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ಕೊಟ್ಟ ಬಿ ಜಿ ಎಲ್ ಸ್ವಾಮಿ, ಡಿ ವಿ ಜಿ ಅವರ ಪುತ್ರರು. ತಮ್ಮ ಜೀವನ ಅಂತ್ಯದ ವರೆಗೂ ಮದರಾಸಿನಲ್ಲೇ ಕಾಲ ಕಳೆದ ಸ್ವಾಮಿ ಕನ್ನಡ ಸಾಹಿತ್ಯ ಕಂಡ ಅಪರೂಪದ ಬರಹಗಾರರು.

ಗೌರವಗಳು / ಪ್ರಶಸ್ತಿಗಳು

ಡಿ.ವಿ.ಗುಂಡಪ್ಪನವರು ೧೯೩೨ ರಲ್ಲಿ ಮಡಿಕೇರಿಯಲ್ಲಿ ನಡೆದ ೧೮ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷರಾಗಿದ್ದರು. ೧೯೩೫ ರಲ್ಲಿ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಸ್ಥಾಪಿಸಿದರು. ೧೯೬೧ ರಲ್ಲಿ ಡಿ ವಿ ಜಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಿ. ಲಿಟ್. ಪದವಿ ನೀಡಿ ಗೌರವಿಸಿತು. ಇದು ಡಿ ವಿ ಜಿ ಅವರು ಪತ್ರಿಕೋದ್ಯಮ ಹಾಗೂ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆಗಾಗಿ ಸಂದ ಪುರಸ್ಕಾರ. ೧೯೬೭ ರಲ್ಲಿ ಶ್ರೀಮದ್ಭಗವದ್ಗೀತಾ ತಾತ್ಪರ್ಯ ಎಂಬ ಗ್ರಂಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತು. ೧೯೭೩ ರಲ್ಲಿ ಡಿ ವಿ ಜಿ ಸನ್ಮಾನ ಸಮಿತಿ ಇವರಿಗೆ ಒಂದು ಲಕ್ಷ ರೂಪಾಯಿಗಳ ಗೌರವ ಧನ ಸಮರ್ಪಿಸಿತು. ಇದನ್ನು ತಾವೇ ಸ್ಥಾಪಿಸಿದ ಗೋಖಲೆ ಸಂಸ್ಥೆಗೆ ದಾನ ಮಾಡಿದರು. ೧೯೭೪ ರಲ್ಲಿ ಭಾರತ ಸರ್ಕಾರ "ಪದ್ಮಭೂಷಣ ಪ್ರಶಸ್ತಿ" ನೀಡಿ ಗೌರವಿಸಿತು.


ನಿಧನ

೧೯೭೫ ರ ಅಕ್ಟೋಬರ್ ೭ ರಂದು ಡಿ ವಿ ಜಿ ನಿಧನರಾದರು.


ಗುಂಡಪ್ಪನವರ ಸಮಗ್ರ ಸಾಹಿತ್ಯ


ಕವಿತೆ

  • ನಿವೇದನ
  • ಉಮರನ ಒಸಗೆ
  • ಮಂಕುತಿಮ್ಮನ ಕಗ್ಗ - I
  • ಮರುಳ ಮುನಿಯನ ಕಗ್ಗ - II
  • ಶ್ರೀರಾಮ ಪರೀಕ್ಷಣಂ
  • ಅ೦ತಃ ಪುರಗೀತೆ
  • ಗೀತ ಶಾಕುಂತಲಾ


ನಿಬಂಧ

  • ಜೀವನ ಸೌಂದರ್ಯ ಮತ್ತು ಸಾಹಿತ್ಯ
  • ಸಾಹಿತ್ಯ ಶಕ್ತಿ
  • ಸಂಸ್ಕೃತಿ
  • ಬಾಳಿಗೊಂದು ನಂಬಿಕೆ

ನಾಟಕ

  • ವಿದ್ಯಾರಣ್ಯ ವಿಜಯ
  • ಜಾಕ್ ಕೇಡ್
  • ಮ್ಯಾಕ್ ಬೆಥ್

No comments:

Post a Comment